ಕಸಾಪಗೆ ಆಡಳಿತಾಧಿಕಾರಿಯಾಗಿ ಕೆ.ಎಂ. ಗಾಯತ್ರಿ ಅಧಿಕಾರ ಸ್ವೀಕಾರ:
ಬೆಂಗಳೂರು.
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣ ಹಾಗೂ ಅಧಿಕಾರ ದುರ್ಬಳಕೆ ಸೇರಿ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ಕಸಾಪಗೆ ಆಡಳಿತಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆದೇಶದ ಬೆನ್ನಲ್ಲೇ ಕೆ.ಎಂ. ಗಾಯತ್ರಿ ಅವರು ಕಸಾಪ ಕೇಂದ್ರ ಕಚೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದ್ದಾರೆ.
ಕಸಾಪದಲ್ಲಿ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆಯ ಆರೋಪಗಳ ವಿಚಾರಣೆಗೆ ಸಂಬಂಧಿಸಿದಂತೆ ಸಹಕಾರ ಇಲಾಖೆ ಕಳೆದ ಜುಲೈನಲ್ಲಿ ಆದೇಶ ಹೊರಡಿಸಿ ವಿಚಾರಣಾಧಿಕಾರಿಯನ್ನು ನೇಮಕ ಮಾಡಿತ್ತು.
ವಿಚಾರಣೆಗೆ ಸಂಬಂಧಿಸಿದಂತೆ ಕಸಾಪದವರು ನಿಗದಿತ ಕಾಲಾವಧಿಯಲ್ಲಿ ಹಾಜರಾಗದಿರುವುದು, ಅಗತ್ಯ ದಾಖಲಾತಿಗಳನ್ನು ಒದಗಿಸದಿರುವ ಕಾರಣ ನೀಡಿ ಆಡಳಿತಾಧಿಕಾರಿ ನೇಮಿಸುವಂತೆ ಸಹಕಾರ ಇಲಾಖೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಶಿಫಾರಸು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಇದರಿಂದ ಪ್ರಸ್ತುತ ಅಧ್ಯಕ್ಷರಾಗಿದ್ದ ಮಹೇಶ್ ಜೋಶಿ ಅವರಿಗೆ ತೀವ್ರ ಹಿನ್ನಡೆಯಾದಂತಾಗಿದೆ.
ಮುಂದಿನ ಮೂರು ತಿಂಗಳವರೆಗೆ ಅಥವಾ ಕಸಾಪದ ಹಣಕಾಸಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಗಿಯುವವರೆಗೆ ಆಡಳಿತಾಧಿಕಾರಿಯಾಗಿ ಗಾಯತ್ರಿ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲಾ ಕಸಾಪ ಅಧ್ಯಕ್ಷರು ಆಡಳಿತಾಧಿಕಾರಿಗೆ ವರದಿ ನೀಡಬೇಕಾಗಿದೆ.